ಕೋವಿಡ್ ಸೋಂಕು ದೃಢಪಟ್ಟವರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗಿ: ಸಂಸದ ನಾರಾಯಣಸ್ವಾಮಿ
1 min readಚಿತ್ರದುರ್ಗ,ಮೇ.24:
ಕೋವಿಡ್-19 ರೋಗ ಲಕ್ಷಣಗಳಿರುವವರು ಕೋವಿಡ್ ಪರೀಕ್ಷೆ ಮಾಡಿಸಬೇಕು. ಒಂದು ವೇಳೆ ಕೋವಿಡ್ ಸೋಂಕು ದೃಢಪಟ್ಟರೆ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಂಸದ ಎ.ನಾರಾಯಣಸ್ವಾಮಿ ಹೇಳಿದರು.
ಮೊಳಕಾಲ್ಮುರಿನ ತಾಲ್ಲೂಕಿನ ತಳವಾರಹಳ್ಳಿಗೆ ಸೋಮವಾರ ಜಿಲ್ಲಾಡಳಿತದೊಂದಿಗೆ ಸಂಸದ ಎ.ನಾರಾಯಣಸ್ವಾಮಿ ಭೇಟಿ ನೀಡಿ ತಳವಾರಹಳ್ಳಿ ಗ್ರಾಮದಲ್ಲಿ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.
ಜ್ವರ, ಕೆಮ್ಮು ಬಂದವರು ಯಾವುದೊ ಒಂದು ಮಾತ್ರೆ ತೆಗೆದುಕೊಂಡು ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳಬಾರದು. ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
ಕೋವಿಡ್-19 ಲಕ್ಷಣಗಳಿದ್ದವರು ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರೆ ಕುಟುಂಬದ ಸದಸ್ಯರಿಗೂ ತೊಂದರೆಗೆ ಒಳಗಾಗುತ್ತಾರೆ. ಇದರಿಂದ ಕುಟುಂಬದ ಸದಸ್ಯರೂ ಕೋವಿಡ್ಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಕೋವಿಡ್ ಲಕ್ಷಣಗಳಿರುವವರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ಹೇಳಿದರು.
ಕೋವಿಡ್ ಸೋಂಕು ದೃಢಪಟ್ಟವರೂ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗಬೇಕು. ಬಿಸಿನೀರು, ಊಟ, ತಿಂಡಿ, ಬೆಡ್, ಬೆಡ್ಶೀಟ್ ಸೇರಿದಂತೆ ಕೋವಿಡ್ ಕೇರ್ ಸೆಂಟರ್ನಲ್ಲಿ ಎಲ್ಲರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಕೋವಿಡ್ ಸೋಂಕಿತರು ಗುಣಮುಖವಾಗುವವರೆಗೂ ಕೋವಿಡ್ ಕೇರ್ ಸೆಂಟರ್ನಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳಬೇಕು. ಗ್ರಾಮದಲ್ಲಿಯೇ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುವುದು. ಕೋವಿಡ್ ಕೇರ್ ಸೆಂಟರ್ನಲ್ಲಿ ಸೋಂಕಿತರನ್ನು ಮಕ್ಕಳನ್ನು ನೋಡಿಕೊಳ್ಳುವ ರೀತಿಯಲ್ಲಿ ಆರೈಕೆ ಮಾಡಲಾಗುವುದು ಎಂದು ಸಂಸದರು ತಿಳಿಸಿದರು.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಕೆಮ್ಮು, ಜ್ವರ, ನೆಗಡಿ ಅಂತಹ ಲಕ್ಷಣಗಳು ಕಂಡು ಬಂದರೆ ಗ್ರಾಮದ ಜನರು ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ಕೋವಿಡ್ ಸೋಂಕು ದೃಢಪಟ್ಟರೆ ಭಯ ಪಡದೇ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು. ಬೇಡಿರೆಡ್ಡಿಹಳ್ಳಿಗೆ ಭೇಟಿ;
ಚಳ್ಳಕೆರೆ ತಾಲ್ಲೂಕಿನ ಬೇಡರೆಡ್ಡಿಹಳ್ಳಿಗೆ ಭೇಟಿ ನೀಡಿ ಕೋವಿಡ್ ನಿಯಂತ್ರಣದ ಬಗ್ಗೆ ಹಾಗೂ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.