ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದಕ್ಕಿಂದ ತೊಲಗುವುದು ಒಳ್ಳೆಯದು:ಸಿದ್ದರಾಮಯ್ಯ
1 min readಬೆಂಗಳೂರು:ಕೊರೊನಾವೈರಸ್ ಸೋಂಕು ಹರಡುವಿಕೆಯ ಅಟ್ಟಹಾಸದ ನಡುವೆ ಬಿಜೆಪಿ ಸರ್ಕಾರವು ಅಸ್ತಿತ್ವಕ್ಕೆ ಬಂದು ಒಂದು ವರ್ಷ ಕಳೆಯುತ್ತಾ ಬಂದಿದೆ. ರಾಜ್ಯದಲ್ಲಿ ಸರ್ಕಾರದ ಸಾಧನೆ ಮಾತ್ರ ಶೂನ್ಯವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಯಾವ ಸಾಧನೆ ಮಾಡಿದ್ದೀರಾ ಹೇಳಿ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಹಿಂದಿನ ನಮ್ಮ ಸರ್ಕಾರದ ಸಾಧನೆಗಳನ್ನೇ ತಾವು ಮಾಡಿರುವುದಾಗಿ ಬಿಜೆಪಿ ಸರ್ಕಾರವು ಬಿಂಬಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಕೊರೊನಾವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವಲ್ಲಿ ಹಾಗೂ ಸಮರ್ಥವಾಗಿ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರವು ಸಂಪೂರ್ಣವಾಗಿ ವಿಫಲವಾಗಿದೆ. ಕೊರೊನಾವೈರಸ್ ಉಪಕರಣಗಳ ಖರೀದಿಯಲ್ಲಿಯೇ ಹಗರಣಗಳನ್ನು ಮಾಡಿ ಲೂಟಿ ಹೊಡೆಯುತ್ತಿದ್ದಾರೆ ಎಂದು ದೂಷಿಸುತ್ತಿದ್ದಾರೆ.
ಕರ್ನಾಟಕದಲ್ಲಿ ಈಗ ಲೂಟಿ ಹೊಡೆಯುವ ಸರ್ಕಾರ
ಕೊರೊನಾವೈರಸ್ ಸೋಂಕು ಹರಡುವಿಕೆಯಂತಾ ಸಂದಿಗ್ಧ ಸ್ಥಿತಿಯಲ್ಲಿಯೂ ಬಿಜೆಪಿ ಸರ್ಕಾರವು ಜವಾಬ್ದಾರಿಯನ್ನು ಮರೆತು ನಡೆದುಕೊಳ್ಳುತ್ತಿದೆ. ಕೊರೊನಾವೈರಸ್ ಉಪಕರಣಗಳ ಖರೀದಿಯಲ್ಲಿ ಸಾಕಷ್ಟು ಅಕ್ರಮಗಳನ್ನು ಎಸಗಿದ್ದು, ಲೂಟಿ ಹೊಡೆಯುತ್ತಿದ್ದಾರೆ. ರಾಜ್ಯದಲ್ಲಿ ಲೂಟಿ ಹೊಡೆಯುವುದೊಂದು ಸರ್ಕಾರದ ಸಾಧನೆಯಾಗಿ ಬಿಟ್ಟಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ರೈತರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ ರಾಜ್ಯ ಸರ್ಕಾರ
ರಾಜ್ಯದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ನೆಪದಲ್ಲಿಯೇ ಸರ್ಕಾರವು ವಿವಾದಾತ್ಮಕ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಇದರಿಂದ ರೈತರಿಗೆ ಸಮಸ್ಯೆಗಳು ಹೆಚ್ಚಾಗುತ್ತವೆಯೇ ವಿನಃ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಸರ್ಕಾರದಿಂದ ಆಗುತ್ತಿಲ್ಲ. ಎಂಪಿಎಂಸಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಮಾರುಕಟ್ಟೆ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಅದರ ಬೆನ್ನಲ್ಲೇ ಭೂ ಸುಧಾರಣಎ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ರೈತರನ್ನು ಬೀದಿಗೆ ತಳ್ಳುವುದಕ್ಕೆ ನಿಂತಿದ್ದಾರೆ. ಕಾರ್ಪೋರೇಟ್ ಮತ್ತು ಶ್ರೀಮಂತರಿಗಾಗಿಯೇ ಈ ಕಾಯ್ದೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ದೂಷಿಸಿದ್ದಾರೆ.
ರಾಜಧಾನಿಯಲ್ಲಿ ಅಭಿವೃದ್ಧಿ ಕೆಲಸ ಆಗತ್ತಿಲ್ಲ
ಬಿಜೆಪಿ ಸರ್ಕಾರವು ಅಸ್ತಿತ್ವಕ್ಕೆ ಬಂದು ಒಂದು ವರ್ಷವೇ ಕಳೆದಿದೆ. ಈ ಒಂದು ವರ್ಷದಲ್ಲಿ ಬೆಂಗಳೂರಿನಲ್ಲಿ ಏನಾದರೂ ಅಭಿವೃದ್ಧಿ ಕೆಲಸಗಳು ನಡೆದಿವೆಯಾ ಎಂದು ಸರ್ಕಾರವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಕಾಣಿಸುತ್ತಿಲ್ಲ. ರಾಜಧಾನಿಯಲ್ಲೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಇನ್ನು, ಇವರೇನು ಅಭಿವೃದ್ಧಿ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.‘ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದಕ್ಕಿಂತ ತೊಲಗಲಿ’
ಕರ್ನಾಟಕದಲ್ಲಿ ಸರ್ಕಾರದ ರಚಿಸಿದ ನಂತರದಲ್ಲಿ ಒಂದೇ ಒಂದು ದಿನ ಸಾಧನೆ ಮಾಡಿದ್ದೀವಿ ಎಂದು ತೋರಿಸಲಿ. ಇವರ ಕೈಯಲ್ಲಿ ಯಾವುದೂ ಆಗುತ್ತಿಲ್ಲ. ರಾಜ್ಯದಲ್ಲಿ ನಯಾಪೈಸೆ ಅಭಿವೃದ್ಧಿ ಆಗುತ್ತಿಲ್ಲ. ಆರ್ಥಿಕ ಪರಿಸ್ಥಿತಿಯನ್ನು ಮೇಲೆತ್ತುವುದಕ್ಕೆ ಆಗುತ್ತಿಲ್ಲ. ಕೊರೊನಾವೈರಸ್ ಸೋಂಕು ನಿರ್ವಹಣೆಯನ್ನು ಸರಿಯಾದ ನಿಟ್ಟಿನಲ್ಲಿ ಮಾಡುತ್ತಿಲ್ಲ. ಒಟ್ಟಾರೆ ಈ ಸರ್ಕಾರದ ಸಾಧನೆಯು ಜೀರೋ. ಇಂಥ ಸರ್ಕಾರವು ರಾಜ್ಯದಲ್ಲಿ ಇರುವುದಕ್ಕಿಂತ ತೊಲಗುವುದೇ ಲೇಸು ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.