ಪೋಷಣ್ ಮಾಸಾಚರಣೆ: ಪರಿಣಾಮಕಾರಿ ಅನುಷ್ಠಾನಕ್ಕೆ ಶ್ರಮಿಸಿ:ಡಿಸಿ ಕವಿತಾ ಎಸ್ ಮನ್ನಿಕೇರಿ
1 min readಪೋಷಣ್ ಮಾಸಾಚರಣೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ
ಚಿತ್ರದುರ್ಗ, ಸೆಪ್ಟೆಂಬರ್08:
ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಸೆಪ್ಟೆಂಬರ್ 08 ರಿಂದ 30ರ ವರೆಗೆ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ದೇಶಾದ್ಯಂತ ಆಚರಿಸಲು ಕರೆ ನೀಡಲಾಗಿದ್ದು, ಜಿಲ್ಲೆಯಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ತ್ವರಿತ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ “ಪೋಷಣ್ ಮಾಸಾಚರಣೆ” ನಮ್ಮ ಸಂಕಲ್ಪ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮದ ಕುರಿತು ಜಾಗೃತಿ ಮೂಡಿಸುವ ಕರಪತ್ರಗಳನ್ನು ಬಿಡುಗಡೆಗೊಳಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಪೋಷಣ್ ಮಾಸಾಚರಣೆ ಕಾರ್ಯಕ್ರಮವು ಕೇವಲ ಉದ್ಘಾಟನೆಗೆ ಮಾತ್ರವಷ್ಟೇ ಸೀಮಿತವಾಗದೆ ಯಶಸ್ವಿಯಾಗುವಂತೆ ಕಾರ್ಯನಿರ್ವಹಿಸಬೇಕು. ಅಪೌಷ್ಠಿಕ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡುವುದು ಹಾಗೂ ಪೌಷ್ಠಿಕ ಕೈತೋಟ ನಿರ್ಮಾಣ ಮಾಡುವ ಚಟುವಟಿಕೆಗಳಿಗೆ ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ್ ಮಾತನಾಡಿ, ಇಲಾಖೆ ವತಿಯಿಂದ ಪ್ರತಿ ವರ್ಷದಂತೆ ಸೆಪ್ಟೆಂಬರ್ ತಿಂಗಳನ್ನು ರಾಷ್ಟ್ರೀಯ ಪೋಷಣ್ ಮಾಸವನ್ನು ಆಚರಿಸಲಾಗುತ್ತಿದ್ದು, ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದರ ಮೂಲಕ ಅರಿವು ಮೂಡಿಸಲಾಗುವುದು ಎಂದು ಹೇಳಿದರು.
ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಖ್ಯವಾಗಿ ತೀವ್ರ ಅಪೌಷ್ಠಿಕ ಮಕ್ಕಳನ್ನು ಗುರುತಿಸುವಿಕೆ ಮತ್ತು ಚಿಕಿತ್ಸೆ ನೀಡುವುದು ಹಾಗೂ ಕೈತೋಟಗಳನ್ನು ಬೆಳೆಸಿ ಪೌಷ್ಠಿಕ ಆಹಾರ ಸೇವಿಸಲು ಉತ್ತೇಜಿಸುವುದು ಅಭಿವೃದ್ಧಿ ಈ ಎರಡು ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜಿಲ್ಲೆಯ ಪ್ರತಿ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಪೋಷಣ ಸಭೆಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಟಿ.ಯೋಗೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ರೆಡ್ಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು, ಪೋಷಣ್ ಅಭಿಯಾನ ಯೋಜನೆಯ ಸಂಯೋಜಕರು, ಸಹಾಯಕರು ಹಾಗೂ ಇಲಾಖಾ ಸಿಬ್ಬಂದಿ ಹಾಜರಿದ್ದರು.