May 19, 2024

Chitradurga hoysala

Kannada news portal

ಪೋಷಕಾಂಶಯುಕ್ತ ಆಹಾರ ಸೇವೆನೆಯ ಮೂಲಕ ಪ್ರತಿಯೊಬ್ಬರು ಉತ್ತಮ ಆರೋಗ್ಯ ಪಡೆಯಬೇಕು: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

1 min read

ಚಿತ್ರದುರ್ಗ: ಸೆಪ್ಟೆಂಬರ್15
ಪೋಷಕಾಂಶಯುಕ್ತ ಆಹಾರ ಸೇವೆನೆಯ ಮೂಲಕ ಪ್ರತಿಯೊಬ್ಬರು ಉತ್ತಮ ಆರೋಗ್ಯ ಪಡೆಯಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಪೋಷಣ್ ರಥ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪೋಷಣ್ ಅಭಿಯಾನ ವಿಶೇಷ ಕಾರ್ಯಕ್ರಮವಾಗಿದ್ದು, ಪೋಷಣ್ ಅಭಿಯಾನದ ಬಗ್ಗೆ ಜಿಲ್ಲೆಯ ಜನರಿಗೆ ಹೆಚ್ಚಿನ ಮಾಹಿತಿ ಇರುವುದಿಲ್ಲ. ಹಾಗಾಗಿ ಈ ಅಭಿಯಾನದ ಬಗ್ಗೆ ತಂದೆ, ತಾಯಿಗಳು ಮತ್ತು ಸರ್ಕಾರ ಹೆಚ್ಚಿನ ಗಮನಹರಿಸಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಪೌಷ್ಠಿಕ ಆಹಾರವನ್ನು ಸೇವಿಸಲು ಪ್ರೋತ್ಸಾಹ ನೀಡುವುದರ ಜೊತೆಗೆ ತಿಳುವಳಿಕೆ ನೀಡಬೇಕು ಎಂದು ಸಲಹೆ ನೀಡಿದರು.  
ಆಫ್ರಿಕನ್ ಸೇರಿದಂತೆ ಅನೇಕ ದೇಶಗಳಲ್ಲಿ ಮಕ್ಕಳು ತಿಂಗಳು ಗಟ್ಟಲೇ ಆಹಾರ ಸಿಗದೆ ನರಳಿ ಸತ್ತು ಹೋಗಿರುವುದನ್ನು ನೋಡಿದ್ದೇವೆ. ಬಹಳಷ್ಟು ಮಕ್ಕಳು ಅಪೌಷ್ಠಿಕತೆಯಿಂದ ರೋಗಗಳಿಗೆ ತುತ್ತಾಗಿರುವುದನ್ನು ಕಂಡಿದ್ದೇವೆ. ಈ ನಿಟ್ಟಿನಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದ ಬಗ್ಗೆ  ವಿಶೇಷ ಗಮನಹರಿಸಬೇಕು. ಗರ್ಭಿಣಿಯರು ಮತ್ತು ಮಕ್ಕಳು ಪೋಷಕಾಂಶಯುಕ್ತ ಆಹಾರ ಸೇವನೆ ಮಾಡಿದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು.  
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪೋಷಣ್ ಮಾಸಾಚರಣೆ ಅಭಿಯಾನ ಆಚರಿಸಲಾಗುತ್ತಿದ್ದು, ಎಲ್ಲ ಮಕ್ಕಳು ಪೋಷಕಾಂಶಯುಕ್ತ ಆಹಾರ ಸೇವನೆ ಮಾಡಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಪೋಷಣ್ ಮಾಸಾಚರಣೆ ಅಭಿಯಾನ ಜಿಲ್ಲೆಯಲ್ಲಿ ಯಶಸ್ವಿಯಾಗಬೇಕು. ಇದರ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣವಾಗಲಿ ಎಂದು ಆಶಯ ವ್ಯಕ್ತಪಡಿಸಿದರು.  
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷ ನರಸಿಂಹರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕ ಕೆ.ಎಸ್.ರಾಜಾನಾಯ್ಕ್ ಇದ್ದರು.

About The Author

Leave a Reply

Your email address will not be published. Required fields are marked *