ಸಿದ್ದರಾಮಯ್ಯ ವಿರುದ್ದ ಮಾತನಾಡುವ ನೈತಿಕತೆ ಯಾರಿಗೂ ಇಲ್ಲ: ಜಿ.ಪಂ.ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು
1 min readಚಿತ್ರದುರ್ಗ:
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಜಾತ್ಯಾತೀತ ನಾಯಕರಾಗಿದ್ದು ಅವರ ವಿರುದ್ಧ ಮಾತನಾಡುವ ನೈತಿಕ ಹಕ್ಕು ಯಾರಿಗೂ ಇಲ್ಲ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಬೇಸರ ವ್ಯಕ್ತ ಪಡಿಸಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಶುಕ್ರವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯನವರು ಒಬ್ಬ ಅಹಿಂದ ಸಮುದಾಯಗಳ ನಾಯಕರಾಗಿದ್ದಾರೆ. ಅವರ ಹೆಸರಿಗೆ ಕೆಟ್ಟ ಹೆಸರು ತರಲು ಕೆಲವರು ವಿನಾ ಕಾರಣ ಟೀಕೆ ಟಿಪ್ಪಣಿಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಎಚ್ಚರಿಸಿದರು.
ಸಿದ್ದರಾಮಯ್ಯನವರು ಯಾವುದೇ ಕಾರಣಕ್ಕೂ ಕುರುಬ ಎಸ್ಟಿ ಮೀಸಲಾತಿ ವಿರೋಧಿಯಲ್ಲ. ಅವರು ಎಸ್ಟಿ ಮೀಸಲಾತಿ ಹೋರಾಟ ಸಮಿತಿ ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ನೈತಿಕ ಬೆಂಬಲ ನೀಡಿದ್ದಾರೆ. ಅಲ್ಲದೆ ಕುರುಬ ಸಮಾಜದ ಎಸ್ಟಿ ಮೀಸಲಾತಿಗೆ ಅವರ ಬೆಂಬಲ ಇರುವುದರಿಂದಲೇ ಹೋರಾಟ, ಪಾದಯಾತ್ರೆ ಇಷ್ಟೊಂದು ಯಶಸ್ವಿಯಾಗಲು ಕಾರಣವಾಗಿದೆ ಎಂದು ತಿಳಿಸಿದರು.
ಕುರುಬ ಸಮಾಜದ ಮುಖಂಡ ಬಿ.ಟಿ.ಜಗದೀಶ್ ಮಾತನಾಡಿ ಫೆ.7 ರಂದು ಬೆಂಗಳೂರಿನಲ್ಲಿ ನಡೆಯುವ ಬೃಹತ್ ಸಮಾವೇಶಕ್ಕೆ ರಾಜ್ಯಾಧ್ಯಂತ 10 ಲಕ್ಷಕ್ಕೂ ಅಧಿಕ ಸಂಖ್ಯೆ ಜನರು ಸೇರಲಿದ್ದಾರೆ. ಚಿತ್ರದುರ್ಗ ಜಿಲ್ಲೆಯಿಂದ 200ಕ್ಕೂ ಹೆಚ್ಚಿನ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ವೈಯಕ್ತಿಕವಾಗಿ ಸಾಕಷ್ಟು ಮಂದಿ ಸಮಾವೇಶಕ್ಕೆ ಬೇರೆ ಬೇರೆ ವ್ಯವಸ್ಥೆಯೊಂದಿಗೆ ಆಗಮಿಸಲಿದ್ದಾರೆಂದು ತಿಳಿಸಿದರು.
ಕುರುಬರ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಐತಿಹಾಸಿಕ ಪಾದಯಾತ್ರೆ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಎಸ್ಟಿ ಮೀಸಲಾತಿಯನ್ನು ಈಗಾಗಲೇ ಕುರುಬ ಸಮಾಜ ಪಡೆಯುತ್ತಿದ9ೆ. ಅದನ್ನು ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಬೇಕು ಎಂದು ಆಗ್ರಹ ಮಾಡಿದರು.
ಕುರುಬ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಮ್, ಮಂಜಪ್ಪ, ಜಗನ್ನಾಥ್, ನಾಗರಾಜಪ್ಪ, ಓಂಕಾರಪ್ಪ, ರಜನಿ ಲೇಪಾಕ್ಷ, ಮೀನಾಕ್ಷಿ, ತಿಪ್ಪಮ್ಮ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.