ಕೋಟೆನಾಡಿನ ಮೆಡಿಕಲ್ ಕಾಲೇಜು ಕನಸಿಗೆ ಹಣವಿಲ್ವಂತೆ
1 min readಚಿತ್ರದುರ್ಗ ಮೆಡಿಕಲ್ ಕಾಲೇಜ್ ಆರಂಭದ ಕನಸು ಭಗ್ನವಾಗಿದ್ದು ರಾಜ್ಯ ಸರ್ಕಾರ ಎಳ್ಳುನೀರು ಬಿಟ್ಟಿದ್ದು ಸಾರ್ವಜನಿಕರು ತೀವ್ರ ಆಕ್ರೋಶಗೊಂಡಿದ್ದಾರೆ ಎಂದು ಚಿಂತಕ ಜೆ.ಯಾದವರೆಡ್ಡಿ ಬೇಸರ ವ್ಯಕ್ತ ಪಡಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ವಿವಿಧ ಸಂಘಟನೆಗಳ ಮುಖಂಡರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜಿಲ್ಲೆಯ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಗೂಳಿಹಟ್ಟಿ ಡಿ.ಶೇಖರ್ ಅವರು ಚುಕ್ಕೆ ಗುರುತ್ತಿಲ್ಲದ ಪ್ರಶ್ನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಲಿಖಿತ ಉತ್ತರ ನೀಡಿದ್ದು ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜ್ ಸ್ಥಾಪಿಸುವ ಯಾವುದೇ ಉದ್ದೇಶವಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ ವೈದ್ಯಕೀಯ ಕಾಲೇಜ್ ಆರಂಭಿಸಲು 610 ಕೋಟಿ ರೂ.ಗಳ ಅನಾವರ್ತಕ ವೆಚ್ಚ ಹಾಗೂ 60 ಕೋಟಿ ರೂ.ಗಳ ಆವರ್ತಕ ವೆಚ್ಚ ಆಗಲಿದ್ದು ಅನುದಾನದ ಕೊರತೆಯಿಂದಾಗಿ ಕಾಲೇಜ್ ಆರಂಭಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಹಿಂದುಳಿದ ಜಿಲ್ಲೆಗೆ ಸರ್ಕಾರ ಅನ್ಯಾಯ ಮಾಡಿದೆ ಎಂದು ದೂರಿದರು.
ಕಾಲೇಜ್ ಆರಂಭಿಸಲು ಆಗುವುದಿಲ್ಲ ಎನ್ನುವುದಾದರೆ ಇತ್ತೀಚೆಗೆ ಇದೇ ಸಚಿವ ಸುಧಾಕರ್ ಏಕೆ ಸ್ಥಳ ಪರಿಶೀಲನೆಗೆ ಬರಬೇಕಿತ್ತು, ಅಲ್ಲದೆ ಜಿಲ್ಲೆಯ ಶಾಸಕರು 60 ಕೋಟಿ ರೂ.ಅನುದಾನ ಬಿಡುಗಡೆಯಾಗಿದೆ ಎಂದು ಏಕೆ ಸುಳ್ಳು ಹೇಳಬೇಕಿತ್ತು ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ನುಲೇನೂರು ಶಂಕರಪ್ಪ, ರೈತ ಮುಖಂಡ ರುದ್ರಸ್ವಾಮಿ, ಮಲ್ಲಿಕಾರ್ಜುನ್ ಸುದ್ದಿಗೋಷ್ಠಿಯಲ್ಲಿದ್ದರು.