April 25, 2024

Chitradurga hoysala

Kannada news portal

ಕೋವಿಡ್ ಮಹಾಮಾರಿಗೆ ದೇಶವೇ ನಲುಗುತ್ತಿದೆ:ಕೆ.ಮಂಜುನಾಥ್

1 min read

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿತ್ರದುರ್ಗ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಚಿತ್ರದುರ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ನೌಕರರಿಗೆ covid 19 ಲಸಿಕ ಅಭಿಯಾನವನ್ನು ದಿನಾಂಕ 23.04.2021ನೇ ಶುಕ್ರವಾರ ಭದ್ರಾಮೇಲ್ದಂಡೆ ಯೋಜನೆ ಕಛೇರಿ ಕಟ್ಟಡದಲ್ಲಿ ಆಯೋಜಿಸಲಾಗಿತ್ತು.

ಭದ್ರಾ ಮೇಲ್ದಂಡೆ ಯೋಜನೆ ಇಲಾಖೆಯ ನೌಕರರು ಮತ್ತು ವಿವಿಧ ಇಲಾಖೆಗಳ ಸುಮಾರು 100ಕ್ಕೂ ಹೆಚ್ಚಿನ ಸರ್ಕಾರಿ ನೌಕರರು ಅಭಿಯಾನದಲ್ಲಿ ಭಾಗವಹಿಸಿ ಸ್ವಯಂ ಪ್ರೇರಿತವಾಗಿ ಲಸಿಕೆಯನ್ನು ಪಡೆದರು.

ಈ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಆದ ಶ್ರೀ ರಾಘವನ್ ರವರು ಅಧ್ಯಕ್ಷತೆಯನ್ನು ವಹಿಸಿದ್ದರು ಶಿವಪ್ರಕಾಶ್ ಸೂಪರ್ಡೆಂಟ್ ಇಂಜಿನಿಯರ್, ಜಿಲ್ಲಾಧ್ಯಕ್ಷರು ಕೆ ಮಂಜುನಾಥ್ ಅಭಿಯಾನದ ಮುಖ್ಯ ಅತಿಥಿಗಳಾಗಿ, ಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಜಿ ಆರ್, ರಾಜ್ಯ ಪರಿಷತ್ ಸದಸ್ಯರಾದ ಶ್ರೀ ತಿಮ್ಮಾರೆಡ್ಡಿ ಕೆ ಟಿ, ಶ್ರೀ ರಾಘವೇಂದ್ರ ಜೆ ಉಪಾಧ್ಯಕ್ಷರು ಹಾಗೂ ಜಿಲ್ಲಾ ನೌಕರ ಸಂಘದ ಎಲ್ಲಾ ಪದಾಧಿಕಾರಿಗಳು ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ನಾಮನಿರ್ದೇಶಿತ ಸದಸ್ಯರುಗಳು ಹಾಜರಿದ್ದುರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳಾದ ಡಾಕ್ಟರ್ ಮಂಜುಳಾ, DHO ಕಚೇರಿಯ ಕಚೇರಿ ಮೇಲ್ವಿಚಾರಕರಾದ ಗಂಗಾಧರ, THO ಕಚೇರಿಯ ಕಚೇರಿ ಮೇಲ್ವಿಚಾರಕರಾದ ಪರ್ವೀನ್, ಸುಜಾತ ಕಿರಿಯ ಮಹಿಳಾ ಸಹಾಯಕಿ ರವರುಗಳು ಲಸಿಕಾ ಅಭಿಯಾನದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಕೆ ಮಂಜುನಾಥ್ ಅಧ್ಯಕ್ಷರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಚಿತ್ರದುರ್ಗ ಇವರು ಕರೋನ ಮಹಾಮಾರಿಯ ಅಟ್ಟಹಾಸಕ್ಕೆ ಇಡೀ ಜಗತ್ತು ಈಗಾಗಲೇ ಸಾಕಷ್ಟು ಸಾವು ನೋವುಗಳಿಂದ ತತ್ತರಿಸಿಹೋಗಿದೆ. ಈಗ ಆರಂಭವಾಗಿರುವ ಎರಡನೇ ಅಲೆಯ ತೀವ್ರತೆ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ತಮ್ಮ ರಕ್ಷಣೆಯನ್ನು ಮಾಡಿಕೊಳ್ಳುವುದರ ಮೂಲಕ ಸರ್ಕಾರಿ ಯಂತ್ರದ ಭಾಗವಾದ ಸರ್ಕಾರಿ ನೌಕರರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳನ್ನು ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ಅತ್ಯಂತ ಯಶಸ್ವಿಯಾಗಿ ಪರಿಣಾಮಕಾರಿಯಾಗಿ ತಲುಪಿಸುವ ಕೆಲಸವನ್ನು ಶ್ರಮವಹಿಸಿ ಮಾಡುತ್ತಿರುವುದರಿಂದ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಯಶಸ್ವಿಯಾಗಲು ಸರ್ಕಾರಿ ನೌಕರರ ಕಾರಣ. ಕೊರೊನಾ ಸಂದರ್ಭದಲ್ಲಿ, ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ಸರ್ಕಾರಿ ನೌಕರರು ತುಂಬಾ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದಾರೆ. ಎಂತಹದೇ ವಿಷಮ ಪರಿಸ್ಥಿತಿ ಇದ್ದರೂ ಎದೆಗುಂದದೆ ಕರ್ತವ್ಯ ನಿರ್ವಹಿಸುತ್ತಿರುವ ನಿಮ್ಮ ಸೇವೆ ಮೆಚ್ಚುವಂತದ್ದು. ಭಾರತದ ಹೆಮ್ಮೆಯ ವಿಜ್ಞಾನಿಗಳು ಹೈದರಾಬಾದ್ ನ ಭಾರತ್ ಬಯೋಟೆಕ್ ಹಾಗೂ ಆಕ್ಸ್ಫರ್ಡ್ ಯುನಿವರ್ಸಿಟಿ ಮತ್ತು ಆಸ್ಟ್ರಾಝೆನೆಕಾ ಸಂಸ್ಥೆಗಳು ಕಂಡುಹಿಡಿದಿರುವ ಸಧ್ಯ ಭಾರತದಲ್ಲಿ ಬಳಕೆಯಲ್ಲಿರುವ ಕೊ ವ್ಯಾಕ್ಸಿನ್, ಕೋವಿ ಶಿಲ್ಡ್
ಲಸಿಕೆಗಳು ಯಾವುದೇ ಅಡ್ಡಪರಿಣಾಮ ಇಲ್ಲದೆ ಸಂಪೂರ್ಣ ಸುರಕ್ಷಿತವಾಗಿದ್ದು ನೌಕರರು ಮತ್ತು ಸಾರ್ವಜನಿಕರು ಲಸಿಕೆಯನ್ನು ಎರಡು ಬಾರಿ ಪಡೆಯುವುದರ ಮೂಲಕ ಕೊವಿಡ್ 19 ಎರಡನೇ ಅಲೆಯನ್ನು ಯಶಸ್ವಿಯಾಗಿ ತಡೆಯಲು ಈ ಒಂದು ಲಸಿಕ ಅಭಿಯಾನದ ಪ್ರಯೋಜನ ಪಡೆಯುವಂತೆ ಮನವಿ ಮಾಡಿದರು.

ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳಾದ ಡಾಕ್ಟರ್ ಮಂಜುಳಾ ಹಾಗೂ DHO ಕಚೇರಿಯ ಕಚೇರಿ ಮೇಲ್ವಿಚಾರಕರಾದ ಶ್ರೀ ಗಂಗಾಧರ್ ಅವರು ಮಾತನಾಡಿ ಸದರಿ ಲಸಿಕಾ ಅಭಿಯಾನವನ್ನು ಆಯೋಜನೆ ಮಾಡಿದ್ದಕ್ಕಾಗಿ ನೌಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ತಿಳಿಸುತ್ತಾ, ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡ ಸರ್ಕಾರಿ ನೌಕರರಿಗೆ ಹಾಗೂ ನೌಕರರ ಸಂಘದ ಪದಾಧಿಕಾರಿಗಳಿಗೆ ಲಸಿಕೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು. ಲಸಿಕೆಯ ಬಗ್ಗೆ ಜನಸಾಮಾನ್ಯರಲ್ಲಿ, ನೌಕರರ ಲ್ಲಿರುವ ಗೊಂದಲಗಳನ್ನು ನಿವಾರಿಸಿ ಕೋವಿಡ್ ಎರಡನೇ ಅಲೆಯ ತಡೆಗೆ ಸಹಕರಿಸುವಂತೆ ಮನವಿ ಮಾಡಿದರು. 45ರಿಂದ 59ರ ವಯಸ್ಸಿನ ವ್ಯಕ್ತಿಗಳಿಗೆ ಗಂಭೀರ ಆರೋಗ್ಯ ಸಮಸ್ಯೆಗಳಾದ ಹೃದಯ ಸಂಬಂಧಿ ಕಾಯಿಲೆ, ರಕ್ತದೊತ್ತಡ, ಮಧುಮೇಹ, ಪಾರ್ಶ್ವವಾಯು, ಕಿಡ್ನಿ, ಲಿವರ್, ಕ್ಯಾನ್ಸರ್ ಕಾಯಿಲೆ ಹಾಗೂ ಎಚ್ಐವಿ ಸೋಂಕಿತರು ಹಾಗೂ ಈ ಕಾಯಿಲೆಗಳಿಂದ ಬಳಲುತ್ತಿರುವವರು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ, ಲಸಿಕೆಯನ್ನು ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳು, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಹಾಗೂ ಎಲ್ಲಾ ನಗರ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತಿದೆ ಅಷ್ಟೇ ಅಲ್ಲದೆ ಆಯುಷ್ಮಾನ್ ಭಾರತ ಮತ್ತು ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ 250 ರೂಗಳನ್ನು ಪಾವತಿಸಿ ಪಡೆಯಬಹುದಾಗಿದೆ ಮಾಹಿತಿ ನೀಡಿದರು.

ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ರಾಘವನ್ ರವರು ಸರ್ಕಾರಿ ನೌಕರರು ಫ್ರೆಂಟ್ ಲೈನ್ ವರ್ಕರ್ಸ್ ಆಗಿರುವುದರಿಂದ ಸರ್ಕಾರಿ ನೌಕರರು ತಪ್ಪದೇ ಲಸಿಕಾ ಅಭಿಯಾನದ ಪ್ರಯೋಜನ ಪಡೆದುಕೊಂಡು ಯೋಧರಂತೆ ಕೆಲಸ ನಿರ್ವಹಿಸಲು ಸೂಚಿಸಿದರು. ಕಚೇರಿಗಳಿಗೆ ವಿವಿಧ ಜಿಲ್ಲೆಗಳಿಂದ ಹಾಗೂ ವಿಭಾಗಗಳಿಂದ ವಿವಿಧ ಉದ್ದೇಶಗಳಿಗಾಗಿ ಸಾರ್ವಜನಿಕರು ಕಚೇರಿಗಳಿಗೆ ಭೇಟಿ ನೀಡುತ್ತಾರೆ ಆದ್ದರಿಂದ ನೌಕರರು ತಮ್ಮ ರಕ್ಷಣೆಯೊಂದಿಗೆ ತಮ್ಮ ಕುಟುಂಬವನ್ನು ರಕ್ಷಿಸಿಕೊಂಡು ಕರ್ತವ್ಯ ನಿರ್ವಹಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸರಿ ಸುಮಾರು 100 ಕ್ಕೂ ಹೆಚ್ಚು ಸರ್ಕಾರಿ ನೌಕರರು ಲಸಿಕೆಯನ್ನು ಪಡೆಯುವ ಮೂಲಕ ಲಸಿಕಾ ಅಭಿಯಾನದ ಸದುಪಯೋಗ ಪಡೆದುಕೊಂಡರು.

ವಿಶೇಷ ಮಾಹಿತಿ :-ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಿರಿಯ ಮಹಿಳಾ ಆರೋಗ್ಯ ಸಹಾಯಕರಾದ ಸುಜಾತಾ ರವರು ಈಗಾಗಲೇ ಸರಿ ಸುಮಾರು 5000ಕ್ಕೂ ಹೆಚ್ಚು ಜನರಿಗೆ ಲಸಿಕೆಯನ್ನು ನೀಡಿರುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಅವರಿಗೆ ಸರ್ಕಾರಿ ನೌಕರರ ಸಂಘದ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು.

ಸದರಿ ಮಾಹಿತಿಯನ್ನು ರಾಜ್ಯದ ಮತ್ತು ಜಿಲ್ಲೆಯ ಎಲ್ಲಾ ನೌಕರರಿಗೆ ಮತ್ತು ಜನಸಾಮಾನ್ಯರಿಗೆ ತಮ್ಮ ಪತ್ರಿಕೆಗಳಲ್ಲಿ ಪ್ರಕಟಿಸುವುದನ್ನು ಮೂಲಕ ವ್ಯಾಪಕ ಪ್ರಚಾರ ನೀಡಿ ಕರ್ನಾಟಕ ಸರ್ಕಾರದಿಂದ ನಡೆಯುತ್ತಿರುವ ಉಚಿತ ಕೋವಿಡ್ 19 ರ ಲಸಿಕೆ ಅಭಿಯಾನವನ್ನು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಬೇಕೆಂದು ತಮ್ಮಲ್ಲಿ ಈ ಮೂಲಕ ಮನವಿ ಮಾಡಲಾಗಿದೆ.

About The Author

Leave a Reply

Your email address will not be published. Required fields are marked *