ವಿಕಲಚೇತನರು ಕೋವಿಡ್-19 ಲಸಿಕೆ ಪಡೆಯಲು ಮುಂದಾಗಿ: ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಜೆ.ವೈಶಾಲಿ.
1 min readಚಿತ್ರದುರ್ಗ,ಮೇ.26:
ಕೋವಿಡ್-19 ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿರುವ 18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ನೀಡಲು ಅವಕಾಶ ಕಲ್ಪಿಸಲಾಗಿದ್ದು, ವಿಕಲಚೇತನರು ಕೋವಿಡ್-19 ಲಸಿಕೆ ಪಡೆಯಲು ಮುಂದಾಗಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಹೇಳಿದರು.
ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬಾಲಭವನ ಕೋವಿಡ್ ಲಸಿಕಾ ಕೇಂದ್ರದಲ್ಲಿ ಬುಧವಾರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಉಪಸ್ಥಿತಿಯಲ್ಲಿ ವಿಕಲಚೇತನರಿಗೆ ಕೋವಿಡ್ ಲಸಿಕೆ ಹಾಕಿಸಲಾಯಿತು.
ಲಸಿಕಾ ಕೇಂದ್ರಗಳಲ್ಲಿ ಪ್ರತಿ ದಿನ 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಕಡ್ಡಾಯವಾಗಿ ಲಸಿಕೆಗಳನ್ನು ಕಾಯ್ದಿರಿಸಲಾಗಿದೆ. ಜಿಲ್ಲೆಯಲ್ಲಿರುವ 18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರು ತಮ್ಮ ಅಂಗವಿಕಲತೆ ಗುರುತಿನ ಚೀಟಿ, ಯುಡಿಐಡಿ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆ ಲಸಿಕಾ ಕೇಂದ್ರಗಳಲ್ಲಿ ತೆಗೆದುಕೊಂಡು ಹೋಗಿ ಕೋವಿಡ್ ಲಸಿಕೆ ಪಡೆಯಬಹುದು. ಕೋವಿಡ್-19 ಲಸಿಕೆ ಪಡೆಯಲು ಲಸಿಕಾ ಕೇಂದ್ರಗಳಿಗೆ ತೆರಳುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ಪಡೆಯಬೇಕು ಎಂದು ಹೇಳಿದರು.
ಲಸಿಕಾ ಕೇಂದ್ರಗಳಿಗೆ ತೆರಳಲು ಸಾಧ್ಯವಾಗದ ಮಾನಸಿಕ ಅಸ್ವಸ್ಥರು, ತೀವ್ರತರ ದೈಹಿಕ ವಿಕಲಚೇತನರು, ಬುದ್ಧಿಮಾಂಧ್ಯರ ವಿವರವನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಂದ ಮಾಹಿತಿ ಪಡೆದು ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿ ಲಸಿಕಾ ಕೇಂದ್ರಗಳಿಗೆ ತೆರಳಲು ಸಾಧ್ಯವಾಗದ ವಿಕಲಚೇತನರ ಮನೆ ಬಾಗಿಲಿಗೆ ಮೊಬೈಲ್ ವಾಹನದ ಮೂಲಕ ಭೇಟಿ ನೀಡಿ ಕೋವಿಡ್-19 ಲಸಿಕೆ ನೀಡಲು ಮುಂದಿನ ದಿನಗಳಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.