ಯುವತಿ ಸಿಡಿ ಕೇಸ್: ಬೆಳಗಾವಿ ಸಾಹುಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದೆಯಾ ಎಸ್ಐಟಿ?
1 min readಬೆಂಗಳೂರು:ಬೆಳಗಾವಿ ಸಾಹುಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಸಿಡಿ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು, ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಪ್ರಕರಣ ಸಂಬಂಧ ಸೂಕ್ತ ಸಾಕ್ಷ್ಯಾಧಾರಗಳು ಸಿಗದ ಹಿನ್ನೆಲೆಯಲ್ಲಿ ಬಿ ರಿಪೋರ್ಟ್ ಸಲ್ಲಿಸಿ ಪ್ರಕರಣಕ್ಕೆ ಫುಲ್ ಸ್ಟಾಪ್ ಹಾಕಲು ಅಧಿಕಾರಿಗಳು ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಮಾರ್ಚ್ 26 ರಂದು ಮಹಿಳೆ ಪ್ರಕರಣ ದಾಖಲಿಸಿದ್ದು, ಈ ಹಿನ್ನೆಲೆಯಲ್ಲಿ ಜಾರಕಿಹೊಳಿ ವಿರುದ್ಧ 376 ಸಿ (ಅಧಿಕಾರದಲ್ಲಿದ್ದ ವ್ಯಕ್ತಿಯು ಲೈಂಗಿಕ ಸಂಭೋಗ), 354 ಎ (ಲೈಂಗಿಕ ಕಿರುಕುಳ), 504 (ಶಾಂತಿ ಪ್ರಚೋದನೆ), 506 (ಕ್ರಿಮಿನಲ್ ಬೆದರಿಕೆ), ಐಪಿಸಿಯ 417 (ಮೋಸ) ಮತ್ತು 67 ಎ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧ ಆರಂಭವಾಗಿದ್ದ ತನಿಖೆ ಪೂರ್ಣಗೊಂಡಿದೆ. ಜಾರಕಿಹೊಳಿ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ. ಮಹಿಳೆಯೇ ಪದೇ ಪದೇ ಜಾರಿಹೊಳಿಯವರನ್ನು ಸಂಪರ್ಕಿಸಿದ್ದಾರೆ. ಸಾಕಷ್ಟು ಬಾರಿ ದೂರವಾಣಿ ಕರೆ ಮಾಡಿ ಪ್ರಚೋದನೆ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ. ಲಭ್ಯವಾಗಿರುವ ವಿಡಿಯೋದಲ್ಲಿ ಮಹಿಳೆಗೆ ಬಲವಂತ ಮಾಡಿರುವ, ದೌರ್ಜನ್ಯ ಎಸಗಿರುವ ಯಾವುದೇ ದೃಶ್ಯಗಳೂ ಕಂಡು ಬಂದಿಲ್ಲ. ಇಬ್ಬರ ಸಹಮತದಿಂದಲೇ ಕ್ರಿಯೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.