ಚಿತ್ರದುರ್ಗ,ಜೂನ್30:
ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ಬುಧವಾರ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಸಾಲಸೌಲಭ್ಯ ಹಾಗೂ ಸಹಾಯಧನ ವಿತರಣೆ ಮಾಡಿದರು.
ನಂತರ ಮಾತನಾಡಿದ ಅವರು, ಕೋವಿಡ್-19 ಸಾಂಕ್ರಾಮಿಕ ರೋಗದ ದುರಿತ ಕಾಲದ ಸಂದರ್ಭದಲ್ಲಿ ಬಡವರಿಗೆ ಅನುಕೂಲವಾಗಲಿ ಎಂದು ಉದ್ದೇಶದಿಂದ ಇಲಾಖೆ ವತಿಯಿಂದ ನೇರಸಾಲ ಸೌಲಭ್ಯವನ್ನು ವಿತರಿಸಲಾಗುತ್ತಿದೆ ಎಂದರು.
ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಜನರಿಗೆ ಶಾಶ್ವತವಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು ಎಂಬುದು ಬಹಳ ದಿನ ಬೇಡಿಕೆಯಾಗಿದ್ದು, ಅದರಂತೆ ಇಂದು ನಾಯಕನಹಟ್ಟಿ ಪಟ್ಟಣ ಪಂಚಾಯಿತಿಗೆ ವಿವಿಸಾಗರದಿಂದ ಕುಡಿಯುವ ನೀರು ಪೂರೈಕೆಯ ಶುದ್ಧಿಕರಣ ಘಟಕಕ್ಕೆ ಚಾಲನೆ ನೀಡಲಾಗುತ್ತಿದ್ದು, ಇದರಿಂದ ಪಟ್ಟಣ ಪಂಚಾಯಿತಿಯ 22 ಸಾವಿರ ಕುಟುಂಬಗಳಿಗೆ ಅನುಕೂಲವಾಗಿದ್ದು, ಪಟ್ಟಣದ ಜನತೆಗೆ ಶಾಶ್ವತ ಕುಡಿಯುವ ನೀರು ಸೌಲಭ್ಯ ದೊರೆಯಲಿದೆ ಎಂದರು.
ಇದರ ಜೊತೆಗೆ ಪಟ್ಟಣದ ಜನತೆಗೆ ತುಂಗಾಭದ್ರಾ ಹಿನ್ನೀರಿನಿಂದ ಶಾಶ್ವತ ಕುಡಿಯುವ ನೀರನ ಸೌಲಭ್ಯ ಕಲ್ಪಿಸಲು ಕ್ರಮಕೈಗೊಂಡಿದ್ದು, ಆದಷ್ಟು ಶೀಘ್ರದಲ್ಲಿ ಜಾಕ್ವೆಲ್ ಕೆಲಸ ಪೂರ್ಣವಾದ ನಂತರ ಕುಡಿಯುವ ನೀರು ಸೌಲಭ್ಯ ದೊರೆಯಲಿದೆ. ಭದ್ರಾ ಮೇಲ್ದಂಡೆ ಯೋಜನೆಯಿಂದಲೂ ಈ ಭಾಗದ ಕೆರೆಗಳನ್ನು ತುಂಬಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಶಾಸಕರೂ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರಪ್ಪ ಮಾತನಾಡಿ, ಜಿಲ್ಲೆಯ 700 ಫಲಾನುಭವಿಗಳಿಗೆ ಅಭಿವೃದ್ಧಿ ನಿಗಮದ ವತಿಯಿಂದ ನೇರ ಸಾಲಸೌಲಭ್ಯ ವಿತರಿಸಲಾಗಿದೆ ಎಂದರು.
ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರಸಾಲಸೌಲಭ್ಯ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಲ್ಲಿ ತರಬೇತಿ ನೀಡಿ ಉದ್ಯೋಗ ನೀಡಲಾಗುತ್ತಿದೆ. ಗಂಗಾಕಲ್ಯಾಣ ಯೋಜನೆ, ಭೂಒಡೆತನ ಯೋಜನೆ, ಪ್ರೇರಣ, ಸಮೃದ್ಧಿ ಯೋಜನೆ, ಆದಿವಾಸಿಗಳಿಗೆ ಅಭಿವೃದ್ಧಿ ಕಾಮಗಾರಿಗಳು, ನಿರುದ್ಯೋಗ ಯುವಕರಿಗೆ ಸಾಲಸೌಲಭ್ಯ ಸೇರಿದಂತೆ ನಿಗಮದ ಯೋಜನೆ, ಸಹಾಯಧನಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕವಿತಾ, ನಿಗಮದ ರಾಜು, ಗೋಪಾಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ನಿಗಮದ ಫಲಾನುಭವಿಗಳು ಇದ್ದರು.