ಚಿತ್ರದುರ್ಗ ನಗರ ಸಂಚಾರ ನಡೆಸಿದ ಡಿಸಿ ಕವಿತಾ ಎಸ್.ಮನ್ನಿಕೇರಿ ರಸ್ತೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿ
1 min readಚಿತ್ರದುರ್ಗ ನಗರ ಸಂಚಾರ ನಡೆಸಿದ ಡಿಸಿ ಕವಿತಾ ಎಸ್.ಮನ್ನಿಕೇರಿ
ರಸ್ತೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿ
ಚಿತ್ರದುರ್ಗ,ಜುಲೈ31:
ಚಿತ್ರದುರ್ಗ ನಗರದ ವಿವಿಧ ಕಡೆಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಶನಿವಾರ ಮುಂಜಾನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಬಿ.ಡಿ. ರಸ್ತೆಯ ಚಳ್ಳಕೆರೆ ಗೇಟ್, ಪಂಚಾಚಾರ್ಯ ಕಲ್ಯಾಣ ಮಂಟಪ ಎದುರು, ಸರ್ಕಾರಿ ವಿಜ್ಞಾನ ಕಾಲೇಜ್ ಮುಂಭಾಗ, ಮದಕರಿ ನಾಯಕ ವೃತ್ತ, ಸ್ಟೇಟ್ ಬ್ಯಾಂಕ್ ಇಂಡಿಯಾ ವೃತ್ತ, ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ರಸ್ತೆ, ಅಂಚೆ ಕಚೇರಿ ರಸ್ತೆ, ನೀಲಕಂಠೇಶ್ವರ ದೇವಸ್ಥಾನ ರಸ್ತೆ, ಹೊಳಲ್ಕೆರೆ ರಸ್ತೆಯ ಗೌರಸಂದ್ರ ಮಾರಮ್ಮ ದೇವಸ್ಥಾನ ಮತ್ತು ಕನಕ ವೃತ್ತ ಸೇರಿದಂತೆ ನಗರದ ವಿವಿಧೆಡೆ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಗಳಿಗೆ ಭೇಟಿ ನೀಡಿ ರಸ್ತೆ ಅಗಲೀಕರಣದ ಅಡೆತಡೆಗಳನ್ನು ಪರಿಶೀಲನೆ ನಡೆಸಿದರು.
ಚಿತ್ರದುರ್ಗ ನಗರದ ಎಸ್ಬಿಐ ವೃತ್ತದ ರಸ್ತೆ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು, ಎಸ್ಬಿಐ ಬ್ಯಾಂಕ್ ಬಳಿ ಪ್ರತಿ ನಿತ್ಯವೂ ನೂರಾರು ಸಾರ್ವಜನಿಕರು ವಹಿವಾಟು ನಡೆಸಲು ಆಗಮಿಸುತ್ತಿರುತ್ತಾರೆ. ಆದರಲ್ಲೂ ಹಿರಿಯ ನಾಗರಿಕರು, ಗರ್ಭಿಣಿಯರು ಬರುವುದರಿಂದ ರಸ್ತೆ ದಾಟಲು ಹರಸಾಹಸ ಪಡುತ್ತಾರೆ. ಹಾಗಾಗಿ ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಅದಷ್ಟು ತ್ವರಿತವಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಚಿತ್ರದುರ್ಗ ನಗರದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಮದ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡಗಳ ಒತ್ತುವರಿಯನ್ನು ಶೀಘ್ರವಾಗಿ ತೆರವು ಮಾಡಿಕೊಡುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಮಗಾರಿಗಳನ್ನು ನಡೆಸುತ್ತಿರುವ ಸ್ಥಳಗಳಲ್ಲಿ ರಸ್ತೆ ಸುರಕ್ಷತಾ ಕ್ರಮವನ್ನು ಅನುಸರಿಸಬೇಕು. ಕಾಮಗಾರಿ ಕೈಗೊಂಡಿರುವ ಸ್ಥಳಗಳಲ್ಲಿ ನಾಮಫಲಕಗಳನ್ನು ಅಳವಡಿಸಿ ರಸ್ತೆ ಕಾಮಗಾರಿ ನಡೆಸಬೇಕು ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಸತೀಶ್ಬಾಬು, ನಗರಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶ್ ರೆಡ್ಡಿ, ಲೋಕೋಪಯೋಗಿ ಇಲಾಖೆಯ ಜಿ. ಕೃಷ್ಣಪ್ಪ, ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಮ್ಮಣ್ಣ, ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಗೋಪಾಲ್, ನಗರಸಭೆಯ ಎಂಜಿನಿಯರ್ ಮನೋಹರ್ ಸೇರಿದಂತೆ ಮತ್ತಿತರರು ಹಾಜರಿದ್ದರು.