ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರಾದ ಎ. ನಾರಾಯಣಸ್ವಾಮಿ ಸೂಚನೆ ಶಾಲೆಗಳಿಗೆ ಕಾಂಪೌಂಡ್ ನಿರ್ಮಾಣಕ್ಕೆ ಆದ್ಯತೆ ನೀಡಿ
1 min readಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ಸೂಚನೆ
ಶಾಲೆಗಳಿಗೆ ಕಾಂಪೌಂಡ್ ನಿರ್ಮಾಣಕ್ಕೆ ಆದ್ಯತೆ ನೀಡಿ.
___________________________________
ಚಿತ್ರದುರ್ಗ,ಸೆಪ್ಟೆಂಬರ್09:
ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳಿಗೆ ಆಟದ ಮೈದಾನ, ಕಾಂಪೌಂಡ್, ಅಡುಗೆಕೋಣೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರಾದ ಎ. ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಬಹುತೇಕ ಶಾಲಾ-ಕಾಲೇಜುಗಳಲ್ಲಿ ಮೂಲಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಹಾಗಾಗಿ ಶಾಲೆಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಶಾಲೆಗಳ ಅಭಿವೃದ್ಧಿಗೆ ಗಮನಹರಿಸಬೇಕು ಎಂದು ತಾಕೀತು ಮಾಡಿದರು.
ದುಂದುವೆಚ್ಚ ಮಾಡಬೇಡಿ: ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಕೊಠಡಿ, ಅಂಗನವಾಡಿ ಕೇಂದ್ರ ನಿರ್ಮಾಣ ಸೇರಿದಂತೆ ಹಲವು ನಿರ್ಮಾಣ ಕಾಮಗಾರಿಗಳಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳಿಗೆ ಒಂದು ಚದರಕ್ಕೆ ರು.2.25 ಲಕ್ಷ ವರೆಗೆ ವೆಚ್ಚ ಮಾಡಲಾಗುತ್ತಿದೆ. ಅಪಾರ್ಟ್ಮೆಂಟ್ ನಿರ್ಮಾಣ ಮಾಡುವವರು ಪರಿಕರ, ಪಿಠೋಪಕರಣ ಎಲ್ಲ ಸೇರಿದಂತೆ ಸಂಪೂರ್ಣ ಸಿದ್ಧವಾದ ಮನೆಯನ್ನು ರೂ.2.50 ಲಕ್ಷದಲ್ಲಿ ನಿರ್ಮಾಣ ಮಾಡಿ ಕೊಡುತ್ತಾರೆ. ಆದರೆ ಇಲ್ಲಿ ಸಾರ್ವಜನಿಕರ ಹಣ ದುಂದುವೆಚ್ಚವಾಗುತ್ತಿರುವುದು ಎದ್ದು ಕಾಣುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ:
******* ಈಗಿನ ಶಾಲೆಗಳ ಸ್ಥಿತಿಗತಿ ನೋಡಿದರೆ ಇವು ಸರ್ಕಾರಿ ಶಾಲೆಗಳೆಂದೆ ಗುರುತಿಸಲಾಗುತ್ತಿದೆ. ಏಕೆಂದರೆ ಮೂಲಭೂತ ಸೌಕರ್ಯಗಳ ಕೊರತೆ ಇಲ್ಲಿ ಎದ್ದು ಕಾಣುತ್ತಿದೆ. ಸರ್ಕಾರದ ಅನೇಕ ಯೋಜನೆಗಳು ವಿವಿಧ ಕಂಪನಿಗಳಿಂದ ನೀಡಲಾಗುವ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಸರ್ಕಾರಿ ಶಾಲೆಗಳನ್ನು ಕುಂದುಕೊರತೆ ನಿವಾರಣೆ ಮಾಡಲು ವಿಪುಲ ಅವಕಾಶವಿದೆ. ಈ ನಿಟ್ಟಿನಲ್ಲಿ ಡಿಸಿ, ಸಿಇಒ ಶಾಲೆಗಳಿಗೆ ಆಗಿಂದಾಗೆ ಭೇಟಿ ನೀಡಿದರೆ ಇಂತಹ ಸಮಸ್ಯೆಗಳ ಅರಿವಾಗುತ್ತದೆ ಎಂದ ಅವರು, ಇಂದು ಬೆಳಿಗ್ಗೆ ಒಂದು ಶಾಲೆಗೆ ಭೇಟಿ ನೀಡಿದಾಗ ಆ ಶಾಲೆಗೆ ಕಾಂಪೌಂಡ್ ಇರಲಿಲ್ಲ ಎಂದು ಶಾಲೆಯ ವಾಸ್ತವ ಚಿತ್ರಣ ಬಿಚ್ಚಿಟ್ಟರು.
ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ವಿಭಾಗ, ಡಿಸಿಸಿ ಬ್ಯಾಂಕ್, ಸೊಸೈಟಿಗಳ ಮೂಲಕ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ. ಈ ಹಿಂದೆ ಆರೋ ಘಟಕ ಅಳವಡಿಸಿಲು ಸ್ಮಾರ್ಟ್ ಅಕ್ವಾ ಸಂಸ್ಥೆಗೆ ಗುತ್ತಿಗೆ ನೀಡಲಾಗಿದ್ದು, ಸಕಾಲದಲ್ಲಿ ಕಾಮಗಾರಿ ಅನುಷ್ಠಾನ ಮಾಡದೇ ಇರುವ ಬಗ್ಗೆ ಕ್ರಮ ಕೈಗೊಳ್ಳಲು ಸಭೆಯಲ್ಲಿ ತಿಳಿಸಲಾಗಿತ್ತು. ಆದರೆ ಆ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ಎಫ್ಐಆರ್ ಮಾಡಿದೆ. ಆದರೆ ಸಂಪೂರ್ಣವಾಗಿ ಕ್ರಮವಾಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪೊಲೀಸ್ ವರಿಷ್ಠಾಧಿಕಾರಿಗಳು ಸಂಪೂರ್ಣ ವರದಿ ನೀಡಲು ತಿಳಿಸಿದರು.
ಅಂಗನವಾಡಿ ಕೇಂದ್ರಕ್ಕೆ ಸಿಎ-ಸೈಟ್ ಬಳಸಿ:
******* ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ನಿರ್ವಹಣೆ ಮಾಡಲಾಗುತ್ತಿದ್ದ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ರೂ.14 ಕೋಟಿ ಅನುದಾನ ಬಿಡುಗಡೆಯಾಗಿದೆ. ಆದರೆ ನಗರ ಮತ್ತು ಪಟ್ಟಣ ಪ್ರದೇಶ ವ್ಯಾಪ್ತಿಯಲ್ಲಿ ನಿವೇಶನ ನೀಡದಿರುವ ಕಾರಣ 80 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣವಾಗಿಲ್ಲ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು ಖಾಸಗಿಯಾಗಿ ಸಾಕಷ್ಟು ಹೊಸ ಹೊಸ ಬಡಾವಣೆಗಳು ಆಗುತ್ತಿವೆ. ಇಲ್ಲಿ ನಾಗರಿಕ ಸೌಲಭ್ಯ ನಿವೇಶನಗಳಿರುತ್ತವೆ. ಇವುಗಳನ್ನು ಬಳಕೆ ಮಾಡಿಕೊಂಡು ಕಟ್ಟಡ ಕಟ್ಟಲು ಸೂಚನೆ ನೀಡಿದರು.
94ಸಿಸಿ ಅಡಿ ಸರ್ಕಾರಿ ಜಾಗದಲ್ಲಿ ನಗರ, ಪಟ್ಟಣ ವ್ಯಾಪ್ತಿಯಲ್ಲಿ ಸಕ್ರಮ ಮಾಡಲು ಅವಕಾಶವಿದ್ದರೂ ಇನ್ನೂ ಅನೇಕ ಸ್ಥಳೀಯ ಸಂಸ್ಥೆಗಳ ಈ ಕಾರ್ಯ ನಡೆದಿರುವುದಿಲ್ಲ. ಮತ್ತು ಕೇಂದ್ರ ಸರ್ಕಾರದಿಂದ 5481 ಮನೆಗಳ ನಿರ್ಮಾಣಕ್ಕೆ ಗುರಿ ನೀಡಲಾಗಿದ್ದು, ಸ್ಥಳೀಯ ಸಂಸ್ಥೆಯವರು ಫಲಾನುಭವಿಗಳ ಗುರುತಿಸಿ ಸಾರ್ವಜನಿಕರಿಗೆ ಸೌಲಭ್ಯ ಕಲ್ಪಿಸಲು ತಿಳಿಸಿದರು.
ಎಬಿಆರ್ಕೆ ಕಾರ್ಡ್:
******* ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ಗಳನ್ನು ಇದುವರೆಗೂ ಜಿಲ್ಲೆಯಲ್ಲಿ ಎಷ್ಟು ಜನರಿಗೆ ನೀಡಲಾಗಿದೆ. ಯಾವ ಯಾವ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶವಿದೆ.ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇರಬೇಕು. ಬಾಕಿ ಉಳಿದಿರುವ ಆಯುಷ್ಮಾನ್ ಭಾರತ್ ಕಾರ್ಡ್ ಅನ್ನು ಶೀಘ್ರವಾಗಿ ವಿತರಣೆ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚನೆ ನೀಡಿದರು.
ಕೌಶಲ್ಯ ತರಬೇತಿಗೆ ಅಸಮಾಧಾನ:
****** ಯುವ ಜನತೆ ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಅನುಕೂಲವಾಗುವಂತೆ ಅವರಿಗೆ ಕೌಶಲ್ಯಾಬಿವೃದ್ಧಿ ತರಬೇತಿಗಳನ್ನು ನೀಡುವ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದು ಮತ್ತು ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಕೌಶಲ್ಯ ಕರ್ನಾಟಕ ಹಾಗೂ ಪ್ರಧಾನಮಂತ್ರಿ ಕೌಶಲ್ಯ ತರಬೇತಿ ಯೋಜನೆಯಡಿ ತರಬೇತಿ ನೀಡಲಾಗುತ್ತಿದೆ. ಇದುವರೆಗೂ ಎಷ್ಟು ಜನ ಯುವ ಜನರಿಗೆ ತರಬೇತಿ ನೀಡಿ ಉದ್ಯೋಗ ದೊರಕಿಸಿಕೊಡಲಾಗಿದೆ ಎಂಬ ಅಂಕಿಅಂಶಗಳನ್ನು ನೀಡಲು ಕೌಶಲ್ಯಾಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು. ಪ್ರಧಾನಮಂತ್ರಿ ಕೌಶಲ್ಯ ಕೇಂದ್ರ ಮಾದಾರ ಚನ್ನಯ್ಯ ಗುರುಪೀಠದಲ್ಲಿದೆ. ರಾಜ್ಯ ಸರ್ಕಾರದ ನೆರವಿನೊಂದಿಗೆ ಜಿಲ್ಲೆಯಲ್ಲಿ 5 ಖಾಸಗಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ಇಲ್ಲಿ ಪ್ರತಿ ವಿದ್ಯಾರ್ಥಿಗೆ ಪ್ರತಿ ಗಂಟೆಗೆ ರೂ.40 ರಂತೆ ತರಬೇತಿ ವೆಚ್ಚ ನೀಡಲಾಗುತ್ತಿದೆ. ಈ ಸಂದರ್ಭದಲ್ಲಿ ಸಚಿವರು ಈ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಕೌಶಲ್ಯ ತರಬೇತಿ ಸರಿಯಾದ ರೀತಿಯಲ್ಲಿ ನೀಡುವ ಮೂಲಕ ಯುವ ಜನರಿಗೆ ಉದ್ಯೋಗಾವಕಾಶ ದೊರಕುವಂತಾಗಬೇಕು ಎಂದು ತಾಕೀತು ಮಾಡಿದರು.
ಬೀದಿ ಬದಿ ವ್ಯಾಪಾರಿಗಳಿಗೆ ಸಾಲಸೌಲಭ್ಯ ನೀಡಿ:
********ಸಣ್ಣ ಉದ್ದಿಮೆದಾರರು, ಬಡವರು, ಬೀದಿ ಬದಿ ವ್ಯಾಪಾರಿಗಳಿಗೆ ಬ್ಯಾಂಕಿನಿಂದ ಕಡ್ಡಾಯವಾಗಿ ಸಾಲಸೌಲಭ್ಯ ಕೊಡಬೇಕು. ಸರ್ಕಾರ ಇವರಿಗೆ ನೀಡುವ ಸಾಲಕ್ಕೆ ಶೇ.5ರಷ್ಟು ಬಡ್ಡಿ ಸಬ್ಸಿಡಿ ನೀಡುತ್ತದೆ. ಈ ಮೂಲಕ ಬಡವರನ್ನು ಪ್ರೋತ್ಸಾಹಿಸುವ ಕೆಲಸ ಬ್ಯಾಂಕ್ಗಳಿಂದ ಮಾಡಬೇಕಿದೆ. ಈ ಬಗ್ಗೆ ಜಿಲ್ಲಾ ಪಂಚಾಯಿತಿ ಸಿಇಒ ಅವರು ಡಿಎಲ್ಆರ್ಸಿ (ಬ್ಯಾಂಕರ್ಸ್) ಸಭೆಯಲ್ಲಿ ಪರಿಶೀಲನೆ ಮಾಡಲು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದ