ಮತ ಎಣಿಕಾ ಕೇಂದ್ರಕ್ಕೆ ಚುನಾವಣಾ ವೀಕ್ಷಕರ ಭೇಟಿ
1 min readಮತ ಎಣಿಕಾ ಕೇಂದ್ರಕ್ಕೆ ಚುನಾವಣಾ ವೀಕ್ಷಕರ ಭೇಟಿ: ಪರಿಶೀಲನೆ
ಕೊಪ್ಪಳ :
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಗೆ ನಿಯುಕ್ತಿಯಾದ ಸಾಮಾನ್ಯ ವೀಕ್ಷಕರು, ಚುನಾವಣಾ ವೆಚ್ಚ ವೀಕ್ಷಕರು ಹಾಗೂ ಪೊಲೀಸ್ ವೀಕ್ಷಕರು ಏಪ್ರಿಲ್ 21ರಂದು ಮತ ಎಣಿಕಾ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾಮಾನ್ಯ ವೀಕ್ಷಕರಾದ ವಿ.ಸಂಪತ್, ಸ್ವಪ್ನಿಲ್ ಎಂ ನಾಯಕ, ಭಾನಾ ಪ್ರಕಾಶ ಯಾತರಾ ಹಾಗೂ ಪೊಲೀಸ್ ವೀಕ್ಷಕರಾದ ಮನೋಜ್ ತಿವಾರಿ ಮತ್ತು ಚುನಾವಣಾ ವೆಚ್ಚದ ವೀಕ್ಷಕರಾದ ಎಸ್.ಆರ್.ನೆಡುಮಾರನ್ ಅವರು ವಿಧಾನಸಭಾ ಚುನಾವಣೆಯ ಮತ ಎಣಿಕಾ ಕೇಂದ್ರವಾದ ನಗರದ ಶ್ರೀ ಗವಿಸಿದ್ದೇಶ್ವರ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಮತ ಎಣಿಕಾ ಕೇಂದ್ರದ ಸಿದ್ಧತೆಗಳನ್ನು ಪರಿಶೀಲಿಸಿದರು.
ಮತ ಎಣಿಕಾ ಕೇಂದ್ರದಲ್ಲಿ ನೆಲ ಮಹಡಿಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ 01 ಮತ ಎಣಿಕಾ ಕೇಂದ್ರವನ್ನು ಮತ್ತು 02 ಭದ್ರತಾ ಕೊಠಡಿಗಳನ್ನು, ಕುಷ್ಟಗಿ ವಿಧಾನಸಭಾ ಕ್ಷೇತ್ರದ 01 ಮತ ಎಣಿಕಾ ಕೇಂದ್ರ ಮತ್ತು 01 ಭದ್ರತಾ ಕೊಠಡಿಯನ್ನು ಗುರುತಿಸಲಾಗಿದೆ. ಮತ ಎಣಿಕಾ ಕೇಂದ್ರದ 1ನೇ ಮಹಡಿಯಲ್ಲಿ ಗಂಗಾವತಿ, ಯಲಬುರ್ಗಾ ಮತ್ತು ಕನಕಗಿರಿ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 01 ಮತ ಎಣಿಕಾ ಕೇಂದ್ರವನ್ನು ಮತ್ತು 01 ಭದ್ರತಾ ಕೊಠಡಿಯನ್ನು ಗುರುತಿಸಲಾಗಿದೆ ಮತ್ತು ಮತ ಎಣಿಕೆ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ವೀಕ್ಷಕರಿಗೆ ಮಾಹಿತಿ ನೀಡಿದರು.
ಮತ ಎಣಿಕಾ ಕೇಂದ್ರದಲ್ಲಿ ಭದ್ರತೆಯ ದೃಷ್ಟಿಯಿಂದ ಸಿ.ಸಿ.ಟಿ.ವಿ ವ್ಯವಸ್ಥೆ, ಬ್ಯಾರಿಕೇಡಿಂಗ್ ವ್ಯವಸ್ಥೆ ಮತ್ತು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನೇಮಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮತ ಎಣಿಕೆ ದಿನದಂದು ವಾಹನ ದಟ್ಟಣೆ ತಡೆಯಲು ವಿವಿಧ ಕಡೆಗಳಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮತ ಎಣಿಕೆ ಸಿಬ್ಬಂದಿಗಳ, ಎಣಿಕೆ ಏಜೆಂಟರುಗಳ ತಪಾಸಣೆಗಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ವೀಕ್ಷಕರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ವಿವಿಧ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.