May 20, 2024

Chitradurga hoysala

Kannada news portal

ದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು ಎನ್ನುವುದರಲ್ಲಿ ಯಾವುದೇ ರಾಜಿ ಇಲ್ಲ:ಸಿದ್ದರಾಮಯ್ಯ

1 min read

ಮೊದಲ ಅಧಿವೇಶನದಲ್ಲೇ ಕಾಯ್ದೆಗೆ ತಿದ್ದುಪಡಿ ತರುವ ಸಂಕಲ್ಪ ನಮ್ಮದು


ನಾವು ಕೊಟ್ಟ ಮಾತಿನಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ

ದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು ಎನ್ನುವುದರಲ್ಲಿ ಯಾವುದೇ ರಾಜಿ ಇಲ್ಲ:ಸಿದ್ದರಾಮಯ್ಯ

CHITRADURGAHOYSALA NEWS:
ಬೆಂಗಳೂರು: ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಚಿತವಾಗಿ ನುಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಿ. ಟಿ.ಸಿ.ಎಲ್. ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞ ರೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿ ಟಿ ಸಿ ಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟ ಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿದೆ ಎಂದು ವಿವರಿಸಿದರು .

ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು, ಪಿಟಿಸಿಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು, ಭೂ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರ ಮತ್ತು ನ್ಯಾಯವಾದಿಗಳ ಅಭಿಪ್ರಾಯ ಕೇಳಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳುತ್ತೇವೆ ಎಂದರು.

ನಾವು ಮೊದಲೇ ಕೊಟ್ಟಿದ್ದ ಭರವಸೆಯಂತೆ ಈ ಸರ್ಕಾರದ ಮೊದಲನೆ ಅಧಿವೇಶನದಲ್ಲೇ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಸಭೆಯಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸೇರಿದಂತೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಹೆಚ್.ಕೆ. ಪಾಟೀಲ್, ಡಾ. ಜಿ. ಪರಮೇಶ್ವರ, ಕೆ. ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ನಾಗೇಂದ್ರ, ಕೆ.ಎನ್. ರಾಜಣ್ಣ, ಆರ್.ಬಿ.ತಿಮ್ಮಾಪುರ ಹಾಗೂ
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

35 ಮಂದಿ ನಾಯಕರ ಉಪಸ್ಥಿತಿ
ಸಭೆಯಲ್ಲಿ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ, ಶ್ರೀಧರ್ ಕಲಿವೀರ, ಬಸವರಾಜ ಕೌತಾಳ್, ಮಂಜು, ಇಂದೂದರ ಹೊನ್ನಾಪುರ, ಹರಿರಾಮ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಎನ್.ಮುನಿಸ್ವಾಮಿ, ಎನ್.ವೆಂಕಟೇಶ್, ಡಿ.ಜಿ.ಸಾಗರ್ ಸೇರಿ 35 ಕ್ಕೂ ಅಧಿಕ ಮಂದಿ ದಲಿತ ಮುಖಂಡರು ಮತ್ತು ವಕೀಲರು ಉಪಸ್ಥಿತರಿದ್ದು ತಮ್ಮ ಸಲಹೆ ಮತ್ತು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

About The Author

Leave a Reply

Your email address will not be published. Required fields are marked *